ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಖುಷ್

ಬೆಂಗಳೂರು : ಕಂದಾಯ ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿಯಾಗಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದರು.
ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಬರೀ ಪ್ರಮಾಣದ ವಿಲೇವಾರಿ ಸಾಲದು, ಗುಣಮಟ್ಟದ ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸುವಂತೆ ಕಂದಾಯ ಇಲಾಖೆಯ ಸಚಿವರಾದ ಕೃಷ್ಣಬೈರೇಗೌಡರಿಗೆ ಸೂಚಿಸಿದರು.
10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ ಎಂದು ಮುಖ್ಯಮಂತ್ರಿಗಳಿಗೆ ದಾಖಲೆ ಸಮೇತ ಸಚಿವ ಕೃಷ್ಣಬೈರೇಗೌಡ ಅವರು ವಿವರಿಸಿದರು.
ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ. ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸುವಂತೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿನ ಮಾಸ್ಟರ್ ಪ್ಲಾನ್ಗಳನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿದರು.
ಆದಷ್ಟು ಬೇಗನೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಬೇಕು:
ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3 ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು.
ಈ ಹಿಂದೆ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು. ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇಕಡ 36 ರಷ್ಟು ಪ್ರಕರಣಗಳ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ –ಜಿಲ್ಲಾಧಿಕಾರಿ ಕೋರ್ಟ್ ಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ವಿಲೇವಾರಿ ವೇಗ ಕಡಿಮೆ ಇರುವುದನ್ನು ತಾಂತ್ರಿಕ ಕಾರಣಗಳ ಸಮೇತ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿ ಅವರಿಗೆ ವಿವರಿದರು. ಇದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಈ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ಕೊಡಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳು ವರ್ಷಗಳಿಂದ ಬಾಕಿಯಿರುವುದು ಕಂಡು ಬಂದಿದ್ದು, ಇದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ 9947 ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿಯಿತ್ತು. ಈಗ ಇದರ ಪ್ರಮಾಣ ಕೇವಲ 6 ಸಾವಿರಕ್ಕೆ ಇಳಿದಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಮೀನು ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ.
ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್ ಸರ್ವೆ ಮೂಲಕ ಪ್ರಾಪರ್ಟಿ ಕಾರ್ಡು ನೀಡುತ್ತಿದ್ದೇವೆ. 21 ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೆ ಆರಂಭಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಭೂ ಸುರಕ್ಷಾ ಯೋಜನೆ ಮೂಲಕ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದುವರೆಗೆ ಸುಮಾರು 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ ಪೂರ್ಣಗೊಳಿಸಲಾಗಿದೆ. ಎಲ್ಲಾ 31 ಜಿಲ್ಲೆಗಳಲ್ಲಿ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ. ಹಲವು ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಂದ ಸದರಿ ಜಮೀನು ಸ್ವಾಧೀನಪಡಿಸುವ ಸಂದರ್ಭದಲ್ಲಿ ಎಕ್ಸ್ ಗ್ರೇಷಿಯಾ ನೀಡುವ ಬಗ್ಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು.
ಹಟ್ಟಿ, ತಾಂಡಾಗಳಂತಹ 3,800 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯದಲ್ಲಿರುವ ಎಲ್ಲಾ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಹೊಸದಾಗಿ ರಚಿಸಲಾಗಿರುವ 64 ತಾಲೂಕುಗಳ ಪೈಕಿ 14 ತಾಲೂಕುಗಳಲ್ಲಿ ಆಡಳಿತ ಸೌಧ ನಿರ್ಮಿಸಲಾಗಿದೆ. ಇನ್ನುಳಿದ ತಾಲೂಕುಗಳಲ್ಲಿ ಆಡಳಿತ ಸೌಧ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.