ಅ.೪ ರಂದು ಗ್ರಾ.ಪಂ ನೌಕರರ ಅನಿರ್ದಿಷ್ಟಾವಧಿ ಧರಣಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರಿಗೆ ಶೇ.೭೦ರಷ್ಟು ಸೇವೆಗಳನ್ನು ಗ್ರಾಮ ಪಂಚಾಯಿತಿಗಳಿ0ದ ನೀಡಲಾಗುತ್ತಿದ್ದು ಪಂಚಾಯಿತಿ ನೌಕರರ ಅಗತ್ಯ ಬೇಡಿಕೆಗಳನ್ನು ಈಡೇರಿಸದೇ ಉದಾಸೀನ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಅ.೪ ರಿಂದ ರಾಜ್ಯಾದ್ಯಂತ ಬಾಪೂಜಿ ಸೇವೆ ಹಾಗೂ ಕಛೇರಿಯ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ಆನಂದ ಹಿರೇಮಠ ತಿಳಿಸಿದರು.
ತಾಲ್ಲೂಕಿನ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಹೋರಾಟದಲ್ಲಿ ಪಾಲ್ಗೊಳ್ಳುವ ಕುರಿತು ಇಲ್ಲಿನ ತಾಲ್ಲೂಕಾ ಪಂಚಾಯತ್ ಅಧಿಕಾರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್.ಡಿ.ಎ, ಡಿಇಒ,ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನ ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಾಡುತ್ತಿರುವ ಮನವಿಗಳಿಗೆ ಯಾವುದೇ ಸ್ಪಂದನೆ ನೀಡದೇ ಎಲ್ಲ ಸಮಸ್ಯೆಗಳಿಗೆ ಕೇವಲ ಪಿಡಿಒ, ನೌಕರರನ್ನು, ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.ಈ ಹಿನ್ನೆಲೆಯಲ್ಲಿ ಅ.೪ ರಂದು ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯವರೆಗೆ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಪಿ.ಎಸ್. ನಾಯ್ಕೋಡಿ, ಕಾರ್ಯದರ್ಶಿ ಸಂಘದ ಅಧ್ಯಕ್ಷ ಸಂಗಮೇಶ ಕೂಡಗಿ. ಎಸ್ಡಿಎ ಸಂಘದ ಅಧ್ಯಕ್ಷ ಎಮ್.ಕೆ. ಗುಡಿಮನಿ,ಡಿಇಒ ಸಂಘದ ಅಧ್ಯಕ್ಷ ವೆಂಕಟೇಶ ಭಜಂತ್ರಿ,ಕರವಸೂಲಿ ಸಂಘದ ಅಧ್ಯಕ್ಷ ಅಬ್ದುಲ್ರಜಾಕ ತಮದಡ್ಡಿ,ಗ್ರಾಪಂ ಸದಸ್ಯರ ಒಕ್ಕೂಟದ ಅಧ್ಯಕ್ಷ ರಮೇಶ ಇಂಗಳಗಿ ಇದ್ದರು.ತಾಪಂ ಇಒ ಪರವಾಗಿ ಯೋಜನಾಧಿಕಾರಿ ಖೂಭಾಸಿಂಗ ಜಾಧವ ಮನವಿ ಸ್ವೀಕರಿಸಿದರು.