ಶಿಕ್ಷಣದಲ್ಲಿ ಭಾರತೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ : ನಾರಾಯಣ ಸ್ವಾಮಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ: ಶಿಕ್ಷಣದಲ್ಲಿ ಭಾರತೀಯತೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ, ಸಂಸ್ಕೃತಿಯನ್ನು ಅರಿತುಕೊಳ್ಳಲು ಮತ್ತು ರಾಷ್ಟ್ರೀಯ ಏಕತೆಯನ್ನು ಬೆಳೆಸಲು ಬಹಳ ಮುಖ್ಯವಾಗಿದೆ
ಎಂದು ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ, ಚಲನಚಿತ್ರ ನಿರ್ದೇಶಕ ನಾರಾಯಣ ಸ್ವಾಮಿ ಹೇಳಿದರು.
ಅವರು ರವಿವಾರದಂದು ನಗರದ ಕಂದಗಲ್ ಹನುಮಂತರಾಯ ರಂಗಮ0ದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಭಾರತೀಯ ಶಿಕ್ಷಣವು ವಿದ್ಯಾರ್ಥಿಗಳಿಗೆ ತಮ್ಮ ಸಾಂಸ್ಕೃತಿಕ ಪರಂಪರೆ, ಮೌಲ್ಯ, ಸಂಪ್ರದಾಯಗಳ ಬಗ್ಗೆ ಅರಿವು ಮೂಡಿಸಿ, ಸಾಂಸ್ಕೃತಿಕ ಗುರುತನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ದಿವ್ಯ ಸಾನಿಧ್ಯ ವಹಿಸಿದ್ದ ಬಾಲಗಾಂವ ಅಮೃತಾನಂದ ಸ್ವಾಮೀಜಿ ಮಾತನಾಡಿ, ಭಾರತೀಯ ಶಿಕ್ಷಣವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುತ್ತದೆ. ನೈತಿಕ ಮೌಲ್ಯಗಳು, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ಕಲಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕೌಲಗಿ ಮಾತನಾಡಿ, ಶಿಕ್ಷಣದಲ್ಲಿ ಭಾರತೀಯತೆಯನ್ನು ಅಳವಡಿಸಿಕೊಳ್ಳುವುದು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಅವಶ್ಯಕವಾಗಿದೆ ಎಂದು ಹೇಳಿದರು.
ಅತಿಥಿಗಳಾಗಿ ಜಿಲ್ಲಾ ಉಪಾಧ್ಯಕ್ಷೆ ಶೀಲಾ ಬಿರಾದಾರ, ದರಬಾರ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಿನಾಯಕ ಗ್ರಾಮಪುರೋಹಿತ, ಜಿಲ್ಲಾಧ್ಯಕ್ಷ ಬಿ ಎಸ್ ಬಾಪಗೊಂಡ ಉಪಸ್ಥಿತರಿದ್ದರು. ಪ್ರಾಂತ ಸಹಕಾರ್ಯದರ್ಶಿ ಸಿದ್ದು ಮದರಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಹಕಾರ್ಯದರ್ಶಿ ಸಂತೋಷ ಬಂಡೆ ಧ್ಯೇಯ
ಶ್ಲೋಕ ಮತ್ತು ವಾಕ್ಯ ಹೇಳಿದರು.೧೧ ಜನ ಸಾಧಕರಿಗೆ ವಿವಿಧ ವಿಭಾಗದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು.
ಬಸವರಾಜ ಹೊಸಮನಿ ಸ್ವಾಗತಿಸಿದರು. ಡಾ ಸುಮಾ ಬೋಳರೆಡ್ಡಿ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಮಲ್ಲು ಗುಡ್ಡದ ವಂದಿಸಿದರು.